ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯ ಖರ್ಚುಗೆ ಕಡಿವಾಣವನ್ನು ಹಾಕಿದ್ದು, ಹಾರ ತುರಾಯಿ ಹಾಕದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ತಿಳಿಸಿದ್ದಾರೆ.
ಅನಗತ್ಯ ಖರ್ಚು ವೆಚ್ಚ ಮಾಡದಂತೆ ಸಿಎಂ ಸೂಚನೆಯ ಬೆನ್ನಲ್ಲೇ ಮುಖ್ಯಕಾರ್ಯದರ್ಶಿ ರವಿಕುಮಾರ್ರವರು ಆದೇಶವನ್ನು ಹೊರಡಿಸಿದ್ದಾರೆ. ಇನ್ನು ಮುಂದೆ ಯಾವುದೇ ಕಾರ್ಯಕ್ರಮದಲ್ಲಿ ಹಾರ ತುರಾಯಿ, ಪೇಟ ಶಾಲು, ನೆನಪಿನ ಕಾಣಿಕೆಯನ್ನು ನೀಡಬಾರದು. ಆದರೆ ಕನ್ನಡ ಪುಸ್ತಕಗಳನ್ನು ನೀಡಿ ಗೌರವಿಸಬಹುದೆಂದು ಆದೇಶದಲ್ಲಿ ತಿಳಿಸಿದ್ದಾರೆ.