ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪನವರು ಸೋಮವಾರ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಬಿಎಸ್ವೈ ಹುಟ್ಟೂರಾದ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲ್ಲೂಕಿನ
ಬೂಕನಕೆರೆಯಲ್ಲಿ ನೀರವ ಮೌನ ಆವರಿಸಿದೆ.
ಬಿ.ಎಸ್. ಯಡಿಯೂರಪ್ಪನವರು ತಮ್ಮ ಹುಟ್ಟು ಮತ್ತು ಬಾಲ್ಯವನ್ನು ಬೂಕನಕೆರೆಯಲ್ಲೇ ಕಳೆದಿದ್ದರು. ಆದರೆ ಉದ್ಯೋಗವನ್ನು ಅರಸಿ ಶಿವಮೊಗ್ಗದ ಶಿಕಾರಿಪುರಕ್ಕೆ ಆಗಮಿಸಿದಂತಹ ಬಿಎಸ್ವೈ ಅಲ್ಲಿಂದಲೇ ರಾಜಕೀಯ ಜೀವನ ಆರಂಭಿಸಿದರು.
ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಬೂಕನಕೆರೆ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.
ಬೂಕನಕೆರೆಯ ಹೆಮ್ಮೆಯ ಮಗ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸುದ್ದಿ ಕೇಳಲು ಜನರು ಟಿವಿ ನೋಡಲು ಕುಳಿತುಕೊಂಡಿದ್ದರು. ಈ ಕಾರಣದಿಂದಾಗಿ ಬೂಕನಕೆರೆಯ ಬೀದಿಗಳು ನಿರ್ಜನವಾಗಿದ್ದವು.
ಗ್ರಾಮದ ನಿವಾಸಿ ರಾಮೇಗೌಡ ಎಂಬುವವರು ಮಾತನಾಡಿ, ಯಡಿಯೂರಪ್ಪ ಅವರು ತಮ್ಮ ಅಧಿಕಾರವನ್ನು ಪೂರ್ಣಗೊಳಿಸಲು ಬಿಜೆಪಿ ಹೈಕಮಾಂಡ್ ಬಿಡಬೇಕಿತ್ತು ಎಂದು ಹೇಳಿದ್ದಾರೆ.
ನಾಲ್ಕು ಬಾರಿ ರಾಜ್ಯ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದರು. ಆದರೆ, ಒಂದು ಬಾರಿಯೂ ಅವರು ಅಧಿಕಾರವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ಮತ್ತೊಬ್ಬ ಗ್ರಾಮಸ್ಥ ಬೇಸರ ವ್ಯಕ್ತಪಡಿಸಿದ್ದಾರೆ.
ಪದತ್ಯಾಗ ಬೆನ್ನಲ್ಲೇ ಒಂದೆಡೆ ಯಡಿಯೂರಪ್ಪ ಅವರ ಹುಟ್ಟೂರಿನಲ್ಲಿ ಮೌನ ಆವರಿಸಿದ್ದರೆ, ಯಡಿಯೂರಪ್ಪನವರ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಆಕ್ರೋಶಗಳು ಭುಗಿಲೆದ್ದಿದ್ದವು.
ಯಡಿಯೂರಪ್ಪ ಅವರ ರಾಜೀನಾಮೆಯಿಂದ ನೊಂದ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಬಿಜೆಪಿ ಹೈಕಮಾಂಡ್ ವಿರುದ್ಧ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು. ವರ್ತಕರು ಸ್ವಯಂಪ್ರೇರಿತರಾಗಿ ತಮ್ಮ ಅಂಗಡಿ-ಮುoಗಟ್ಟುಗಳನ್ನು ಮುಚ್ಚುವುದರೊಂದಿಗೆ ಶಿಕಾರಿಪುರದಲ್ಲಿ ಬಂದ್ ಆಚರಿಸಿದರು.
ಶಿಕಾರಿಪುರದ ಯಡಿಯೂರಪ್ಪ ಅವರ ಮನೆಯಲ್ಲಿ ಬೆಳಿಗ್ಗೆಯಿಂದಲೇ ಮೌನದ ವಾತಾವರಣ ಮೂಡಿತ್ತು. ಮನೆಯವರೆಲ್ಲರೂ ಯಡಿಯೂರಪ್ಪನವರ ಪದತ್ಯಾಗದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರಿಂದ ಕೇವಲ ಕೆಲಸಗಾರರು ಮಾತ್ರ ಇದ್ದರು. ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ಸಮಯದಲ್ಲಿ ಬಿಜೆಪಿ ಹೈಕಮಾಂಡ್ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು.