ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ಶುಕ್ರವಾರ ಸಂಜೆ ರಾಜ್ಯದಲ್ಲಿ ಅತಿಯಾದ ಮಳೆಯಿಂದ ಹೆಚ್ಚಾಗಿ ಹಾನಿಯುಂಟಾಗಿರುವoತಹ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದವನ್ನು ನಡೆಸಿದರು.
ಹೆಚ್ಚಿನ ಮಳೆಯಿಂದ ತಲೆದೋರಿರುವ ಪ್ರವಾಹ ಪರಿಸ್ಥಿತಿ ಹಾಗೂ ಕೈಗೊಳ್ಳಲಾಗಿರುವಂತಹ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮುಖ್ಯಮಂತ್ರಿ ಮಾಹಿತಿ ಪಡೆದರು.
ಹೆಚ್ಚಿದ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಗ್ರಾಮಗಳ ಗ್ರಾಮಸ್ಥರನ್ನು ಆದಷ್ಟು ಬೇಗನೆ ತೆರುವುಗೊಳಿಸಿ ಅವರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲು ತಿಳಿಸಿದರು. ಹಾಗೂ ಪ್ರವಾಹ ಉಂಟಾಗುವ ಸಾದ್ಯತೆ ಇರುವ ಗ್ರಾಮಗಳನ್ನು ಸಹ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಲು ಎನ್ ಡಿಅರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳನ್ನು ಅಗತ್ಯ ಇರುವಂತಹ ಜಿಲ್ಲೆಗಳಿಗೆ ತುರ್ತು ಕಳುಹಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.
ಈ ಸಮಯದಲ್ಲಿ ಜನರ ಕಾಳಜಿ ಕೇಂದ್ರಗಳನ್ನು ಆದಷ್ಟು ಹೆಚ್ಚು ತೆರೆದು ಸರ್ವ ಸನ್ನದ್ಧವಾಗಿಟ್ಟುಕೊಳ್ಳಬೇಕು,
ಇಂತಹ ಕಷ್ಟಕರವಾದಂತಹ ಸಂದರ್ಭದಲ್ಲಿ ಅಧಿಕಾರಿಗಳು ಸುಖಾಸುಮ್ಮನೆ ರಜೆ ಹಾಕದೆ ಕೆಲಸವನ್ನು ಬಹಳ ನಿಷ್ಟೆಯಿಂದ ನಿರ್ವಹಿಸಬೇಕು. ಹಣಕಾಸಿನ ನೆರವು ಅಗತ್ಯವಿದ್ದಲ್ಲಿ ತಕ್ಷಣವೇ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ತಿಳಿಸಿದರು.
ಇಂತಹ ಸಮಯದಲ್ಲಿ ತುರ್ತು ಪರಿಸ್ಥಿತಿಗೆ ಮುನ್ಸೂಚನೆಯಾಗಿ ಸೇನಾ ಹೆಲಿಕಾಪ್ಟರ್ ಗಳನ್ನು ತಯಾರಿಯಾಗಿಟ್ಟುಕೊಂಡಿರಬೇಕು.
ಅಧಿಕಾರಿಗಳು 24 ಗಂಟೆ ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಮುಂದಿನ 48 ಗಂಟೆಗಳ ಹವಾಮಾನದ ಪರಿಸ್ಥಿತಿಯನ್ನು ಮುಂಚಿತವಾಗಿಯೇ ತಿಳಿದುಕೊಂಡು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತಿತರ ಜಿಲ್ಲಾಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.