ಮೈಸೂರು: ಕಳೆದ 15 ದಿನಗಳಲ್ಲಿ2 ನೇ ಬಾರಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆಯಾಗಿರುವುದನ್ನು ತೀವ್ರವಾಗಿ ವಿರೋಧಿಸಿ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆಯನ್ನು ನಡೆಸಿದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಿಲಿಂಡರ್ ಬೆಲೆಯನ್ನು 5 ರೂಪಾಯಿ ಹೆಚ್ಚಿಸಿದ್ದಕ್ಕೆ ಪ್ರತಿಭಟನೆ ನಡೆಸಿದ್ದ ಶೋಭಾ ಕರಂದ್ಲಾಜೆ ಎಲ್ಲಿ ಅಡಗಿ ಕುಳಿತಿದ್ದಾರೆ ಎಂದು ಪ್ರಶ್ನಿಸಿದ ಅಧ್ಯಕ್ಷೆ ಪುಷ್ಪಾ ಅಮರನಾಥ್, ‘ಅಚ್ಚೇ ದಿನ್ ಎಂದರೆ ಇದೇನಾ’ ಎಂದು ಪ್ರಶ್ನಿಸಿದರು.
ನಿತ್ಯವೂ ಮಹಿಳೆಯರು ಕಣ್ಣೀರು ಹಾಕುತ್ತಾ ಒಲೆ ಹೊತ್ತಿಸಬೇಕಿದೆ. ಅಡುಗೆ ಅನಿಲ ಖರೀದಿಸಲು ಕಾರ್ಮಿಕರು, ಬಡವರು ಪರದಾಡುತ್ತಿದ್ದಾರೆ ಎಂದು ಹೇಳಿದರು.
ಪ್ರತೀ ವಸ್ತುವಿನ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಒಂದು ಹೊತ್ತು ಊಟಕ್ಕೂ ಪರದಾಡುವಂತಹ ಸ್ಥಿತಿ ಇಂದು ಎದುರಾಗಿದೆ. ರಾಷ್ಟ್ರಪತಿಗಳಾದರೂ ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಕೇಂದ್ರ ಸರ್ಕಾರಕ್ಕೆ ಚಾಟಿಯನ್ನು ಬೀಸಬೇಕು ಎಂದು ಒತ್ತಾಯಿಸಿದರು.
ಉಪಾಧ್ಯಕ್ಷೆ ಪುಷ್ಪವಲ್ಲಿ, ಮುಖಂಡರಾದ ರಾಣಿ, ಕಮಲಾ, ನಾಗರತ್ನ, ಕುಮುದಾ, ಮಂಜುಳಾ ಮುಂತಾದವರೂ ಇದ್ದರು.