ಕೊಡಗು : ಅಕ್ಟೋಬರ್ ಹದಿನೇಳನೇ ತಾರೀಖಿನಂದು ತಲಕಾವೇರಿಯಲ್ಲಿ ನಡೆಯುವ ಶ್ರೀ ಕಾವೇರಿ ತುಲಾ ಸಂಕ್ರಮಣದ ಪವಿತ್ರ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಭಕ್ತರಿಗೆ ಪಾಲ್ಗೊಳ್ಳಲು ಅವಕಾಶ ನೀಡಬೇಕೆಂದು ವಿರಾಜಪೇಟೆಯ ಶಾಸಕರಾದ ಕೆ.ಜಿ ಬೋಪಯ್ಯ ಅವರು ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.
ಕೊರೋನ ನಿಯಮಾವಳಿಗಳು ಇರುವುದರಿಂದ ಎಲ್ಲರಿಗೂ ಈ ವಿಶೇಷ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಅವಕಾಶ ಇರಲಿಲ್ಲ. ಭಕ್ತರ ಭಾವನೆಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ವಿರಾಜಪೇಟೆಯ ಶಾಸಕರಾದ ಕೆ.ಜಿ ಬೋಪಯ್ಯ ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಪ್ರಸ್ತುತ ಅನುಮತಿಯನ್ನು ಸಹ ಪಡೆದಿದ್ದಾರೆ.
ಶಾಸಕ ಕೆ.ಜಿ ಬೋಪಯ್ಯ ಅವರ ಮನವಿಗೆ ಸ್ಪಂದಿಸಿ ಅನುಮತಿ ನೀಡಿದ ಮುಖ್ಯಮಂತ್ರಿಗಳನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಜಿಲ್ಲೆಯ ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.
ಪವಿತ್ರ ಕಾವೇರಿ ತೀರ್ಥೋದ್ಭವವನ್ನು ವೀಕ್ಷಿಸಲು ಬರುವ ಭಕ್ತಾದಿಗಳಿಗೆ ಸೂಚನೆಗಳನ್ನು ನೀಡಿರುವ ಶಾಸಕ ಕೆ.ಜಿ ಬೋಪಯ್ಯ ಅವರು ಎಲ್ಲಾ ಭಕ್ತಾದಿಗಳು ತಲಕಾವೇರಿಗೆ ವಾಹನದಲ್ಲಿ ತೆರಳಲು ಅವಕಾಶ ಕಲ್ಪಿಸಲಾಗಿದೆ, ಭಕ್ತಾದಿಗಳು ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳ ಬಳಕೆಯೊಂದಿಗೆ ಶಿಸ್ತು ಮತ್ತು ಸಂಯಮದಿಂದ ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕು ಹಾಗೂ ಕೋವಿಡ್ ಟೆಸ್ಟ್ ನ ರಿಪೋರ್ಟ್ ಕಡ್ಡಾಯವಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.