ನವದೆಹಲಿ; ಬುದ್ಧಿ ಭ್ರಮಣೆ ಆಗಿರುವ ಬಿಜೆಪಿ ನಾಯಕರಿಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಒಬ್ಬ ಹುಚ್ಚ ಎನ್ನುವ ಬಗ್ಗೆ ನಾವು ಸರ್ಟಿಫಿಕೇಟ್ ಕೊಡಬೇಕಾದ ಅಗತ್ಯ ಇಲ್ಲ. ಬಿಜೆಪಿ ನಾಯಕರೇ ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬ ಹುಚ್ಚ ಎಂದು ಹೇಳುತ್ತಾರೆ. ಅದೇ ರೀತಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾನಸಿಕ ಅಸ್ವಸ್ತರಾದಂತೆ ಮಾತನಾಡುತ್ತಾರೆ.
ಆದುದರಿಂದ ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಬುದ್ಧಿ ಭ್ರಮಣೆ (Mentally Unstable) ಆಗಿರುವ ಬಿಜೆಪಿ ನಾಯಕರಿಗೆ ಮೆಂಟಲ್ ಕೌನ್ಸಿಲಿಂಗ್ ಮಾಡಿಸಲೆಂದು ಮನವಿ ಮಾಡುತ್ತೇನೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಹೇಳಿದರು.
ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀನಿವಾಸ್ ಬಿ.ವಿ. ಅವರು ಬಿಜೆಪಿ ನಾಯಕರಾದ ಸಿ.ಟಿ. ರವಿ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಆಗಬೇಕೆಂದು ಬಟ್ಟೆ ಹೊಲೆಸಿಕೊಂಡಿದ್ದರು. ಆದರೀಗ ಮುಖ್ಯಮಂತ್ರಿ ಸ್ಥಾನ ಸಿಗದೆ ಅವರಿಗೆ ಬುದ್ಧಿ ಭ್ರಮಣೆ ಆಗಿದೆ. ಹಾಗಾಗಿ ಹತಾಶರಾಗಿ ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ.
ಬಿಜೆಪಿ ನಾಯಕರನ್ನು ಮೆಚ್ಚಿಸಲು ಆ ಮೂಲಕ ಪದವಿಯನ್ನು ಗಳಿಸಲು ಕಾಂಗ್ರೆಸ್ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.